ಚೊಂಬು ಜಾಹೀರಾತು ನೀಡಿ, ಈಗ ರಾಜ್ಯದ ಜನತೆಗೆ ಚೊಂಬು ನೀಡುತ್ತಿರುವುದು ಯಾರು ಎಂಬುದು ಅರ್ಥವಾಗುತ್ತಿದೆ – ಶಾಸಕ ಗಂಟಿಹೊಳೆ

ಬೈಂದೂರು: ಗ್ಯಾರಂಟಿ ಯೋಜನೆಯನ್ನೂ ಸಮರ್ಪಕವಾಗಿ ಅನುಷ್ಠಾನ ಮಾಡದೇ, ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ನೀಡದೇ ಏಕಾಏಕಿ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರ ಜನ ಸಾಮಾನ್ಯರಿಗೆ ದೊಡ್ಡ ಆರ್ಥಿಕ ಹೊರ ನೀಡುತ್ತಿದೆ. ರಾಜ್ಯ ಸರ್ಕಾರ ತಕ್ಷಣವೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಹೊರಡಿಸಿರುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಗಂಟೆಹೊಳೆಯವರು ಆಗ್ರಹಿಸಿದ್ದಾರೆ.

ಲೋಕಸಭಾ ಚುನಾವಣೆಯ ಚುನಾವಣಾ ಫಲಿತಾಂಶದ ಸೋಲಿನ ಹತಾಶೆಯನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಜನರ ಮೇಲೆ ತೋರಿಸುತ್ತಿದೆ. ಪೆಟ್ರೋಲ್ ಬೆಲೆಯನ್ನು 3 ರೂಪಾಯಿ ಹಾಗೂ ಡೀಸೆಲ್ ಬೆಲೆಯನ್ನು 3.5 ರೂಪಾಯಿಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿರುವುದು ಕಾಂಗ್ರೆಸ್ಸಿನ ಜನವಿರೋಧಿ ನೀತಿಗೆ ಹಿಡಿದ ಕೈಗನ್ನಡಿಯಾಗಿದೆ. ಚುನಾವಣಾ ಪೂರ್ವದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಆ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಜನರಿಗೆ ಬೆಲೆ ಏರಿಕೆ ಬರೆ ಹಾಕುತ್ತಿರುವುದು ಖಂಡನೀಯ. ರಾಜ್ಯ ಸರ್ಕಾರದ ಜನ ವಿರೋಧಿ ನಿಲುವಿಗೆ ಜನರೇ ಉತ್ತರ ನೀಡಲಿದ್ದಾರೆ ಎಂದು ಶಾಸಕರಾದ ಗುರುರಾಜ ಗಂಟೆಹೊಳೆ ಅವರು ಪುಕಟನೆಯಲ್ಲಿ ತೀಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.